ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ನಾಡು ಕಂಡ ಅತ್ಯಂತ ಶ್ರೇಷ್ಠ ಪ್ರೇಮಕವಿ ಕೆ.ಎಸ್.ನರಸಿಂಹ ಸ್ವಾಮಿ ಅವರ ಕವನಗಳು ಇಂದಿಗೂ ಪ್ರಸ್ತುತ. ಅವರ ಕವನಗಳು ಅಂತರಾಷ್ಟ್ರೀಯ ಮಟ್ಟದಲ್ಲೂ ಪ್ರಸಿದ್ಧಿಯಾಗಿವೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಗೌರವಾಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ಮಥುರಾ ಪ್ಯಾರಾಡೈಸ್ ಸಭಾಂಗಣ ದಲ್ಲಿ ಚಿರಂತರ ಯೋಗ ಮತ್ತು ಸಂಗೀತ ಟ್ರಸ್ಟ್ ಶಿವಮೊಗ್ಗ, ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ, ತಾಲೂಕು, ಹೋಬಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಗಾನಮಲ್ಲಿಗೆ ಕವಿ ಕೆ.ಎಸ್.ನರಸಿಂಹಸ್ವಾಮಿ ವಿರಚಿತ ಗೀತ ಗಾಯನ ಸ್ಪರ್ಧೆ ಕಾರ್ಯಕ್ರಮ ದಲ್ಲಿ ಮಾತನಾಡಿ, ನರಸಿಂಹಸ್ವಾಮಿ ಅವರ ಕವನಗಳಲ್ಲಿ ಜೀವನ ಮೌಲ್ಯಗಳನ್ನು ಕಾಣಬಹುದಾಗಿದೆ. ಜೀವನದ ಅರ್ಥವನ್ನು ಸರಳವಾಗಿ ಕವನಗಳಲ್ಲಿ ವಿವರಿಸುತ್ತಿದ್ದರು ಎಂದು ತಿಳಿಸಿದರು.
ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಶಾಂತಾ ಶೆಟ್ಟಿ ಮಾತನಾಡಿ, ಸುಗಮ ಸಂಗೀತ ಕ್ಷೇತ್ರಕ್ಕೆ ಕೆ.ಎಸ್.ನರಸಿಂಹ ಸ್ವಾಮಿ ಕೊಡುಗೆ ಅಪಾರ. ಕವಿಯ ಭಾವ ಅರಿತು ಕೊಂಡು, ಸಾಹಿತ್ಯವನ್ನು ಅರ್ಥ ಮಾಡಿಕೊಂಡು ಹಾಡಬೇಕು. ಗಾಯನ ವನ್ನು ಗುರುಮುಖೇನ ಕಲಿಯಬೇಕು. ಸಾಧನೆಯ ಹಾದಿ ಸುಗಮವಾಗುತ್ತದೆ ಎಂದು ತಿಳಿಸಿದರು.
ಕೆಎಸ್ಎನ್ ಟ್ರಸ್ಟ್ ಬೆಂಗಳೂರು ವತಿಯಿಂದ ಮುಂದಿನ ದಿನಗಳಲ್ಲಿ ಕುವೆಂಪು ರಂಗ ಮಂದಿರದಲ್ಲಿ ಒಂದು ದಿನದ ಗೀತ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ನಾಡಿನ ಸುಪ್ರಸಿದ್ಧ ಹಾಡುಗಾರರನ್ನು ಆಹ್ವಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಪ್ರಧಾನ ಸಂಚಾಲಕ ಭದ್ರಾವತಿ ವಾಸು, ಸಾಂಸ್ಕೃತಿಕ ಸಂಚಾಲಕರಾದ ಉಮಾ ದಿಲೀಪ್, ರಮೇಶ್ ಮಲ್ಲಾಪುರ, ಖಜಾಂಚಿ ಜಿ.ವಿಜಯ ಕುಮಾರ್, ಮಥುರಾ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
Tags
ಶಿವಮೊಗ್ಗ ವರದಿ